ಧಾರವಾಡ: ಜಮೀನಿನ 'ಎ ಖರಾಬ್' ಜಾಗ ತೆರವುಗೊಳಿಸಿ ಅಭಿವೃದ್ಧಿಪಡಿಸಲು ಅನುಮತಿ ನೀಡಲು ₹50 ಲಕ್ಷ ಲಂಚದ ಹಣ ಸ್ವೀಕರಿಸುತ್ತಿದ್ದ ವೇಳೆ ಧಾರವಾಡ ತಹಸೀಲ್ದಾರ್ ಸಚ್ಚಿದಾನಂದ ಕುಚನೂರ ಅವರ ಮೇಲೆ ಲೋಕಾಯುಕ್ತ ಅಧಿಕಾರಿಗಳು ಬುಧವಾರ ದಿಢೀರ್ ದಾಳಿ ನಡೆಸಿ, ಅವರನ್ನು ರೆಡ್ಹ್ಯಾಂಡ್ ಆಗಿ ವಶಕ್ಕೆ ಪಡೆದಿದ್ದಾರೆ. ಲಂಚದ ಹಣ ಪಡೆಯುತ್ತಿದ್ದಾಗಲೇ ಅಧಿಕಾರಿಗಳು ದಾಳಿ ನಡೆಸಿ ಬಲೆಗೆ ಕೆಡವಿದ್ದು, ಈ ಘಟನೆ ಜಿಲ್ಲಾದ್ಯಂತ ಭಾರಿ ಸಂಚಲನ ಮೂಡಿಸಿದೆ.
ಬಾಗಲಕೋಟೆ ಜಿಲ್ಲೆಯ ಮುಧೋಳ ಮೂಲದ ಪರಮೇಶ್ವರ್ ಅಂಗಡಿ ಎಂಬುವವರು ಧಾರವಾಡ ತಾಲೂಕಿನ ಯರಿಕೊಪ್ಪ ಬಳಿ ಜಮೀನು ಖರೀದಿಸಿದ್ದರು. ಈ ಜಮೀನಿನಲ್ಲಿರುವ 'ಎ ಖರಾಬ್' ಜಾಗವನ್ನು ತೆರವುಗೊಳಿಸಿ ಅಭಿವೃದ್ಧಿಪಡಿಸಲು ಅನುಮತಿ ಪತ್ರ ನೀಡಬೇಕಿದ್ದರೆ ₹1 ಕೋಟಿ ಲಂಚ ನೀಡಬೇಕು ಎಂದು ತಹಸೀಲ್ದಾರ್ ಸಚ್ಚಿದಾನಂದ ಬೇಡಿಕೆ ಇಟ್ಟಿದ್ದರೆನ್ನಲಾಗಿದೆ. ಈ ಪೈಕಿ ಮೊದಲ ಕಂತಾಗಿ ₹50 ಲಕ್ಷ ನೀಡಲು ಮಾತುಕತೆಯಾಗಿತ್ತು.
ಸಂತ್ರಸ್ತ ನೀಡಿದ ದೂರಿನನ್ವಯ ಕಾರ್ಯಪ್ರವೃತ್ತರಾದ ಲೋಕಾಯುಕ್ತ ಅಧಿಕಾರಿಗಳು ಪಕ್ಕಾ ಪ್ಲಾನ್ ರೂಪಿಸಿದ್ದರು. ನಗರದ ಕರ್ನಾಟಕ ಕಾಲೇಜು ಮೈದಾನದಲ್ಲಿ ಮುಂಗಡ ಹಣವಾಗಿ ₹50 ಲಕ್ಷ ಸ್ವೀಕರಿಸುತ್ತಿದ್ದಂತೆಯೇ ಲೋಕಾಯುಕ್ತ ಸಿಬ್ಬಂದಿ ದಾಳಿ ನಡೆಸಿ ತಹಸೀಲ್ದಾರ್ರನ್ನು ವಶಕ್ಕೆ ಪಡೆದುಕೊಂಡಿದ್ದಾರೆ..