ಬೆಂಗಳೂರು: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಇದೇ ಮೊದಲ ಬಾರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೀಸಲಾತಿ ಜಾರಿಗೊಳಿಸಲಾಗಿದ್ದು, ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಒಳಮೀಸಲಾತಿ ಅನ್ವಯಿಸಲಾಗಿದೆ.
ಇದುವರೆಗೂ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಜಾತಿ ಆಧಾರಿತ ಮೀಸಲಾತಿ ಇರಲಿಲ್ಲ. ಅಂಗವಿಕಲರು, ಮಹಿಳೆಯರಿಗೆ ಆದ್ಯತೆ ನೀಡಲಾಗುತ್ತಿತ್ತು. 2026–27ನೇ ಶೈಕ್ಷಣಿಕ ಸಾಲಿನಿಂದಲೇ ಜಾತಿ ಆಧಾರಿತ ಮೀಸಲಾತಿ (ಶೇ 50) ಅಳವಡಿಸಿಕೊಂಡು ನೇಮಕಾತಿ ಮಾಡಲು ಉನ್ನತ ಶಿಕ್ಷಣ ಇಲಾಖೆ ಮುಂದಾಗಿದೆ.
ಸರ್ಕಾರಿ ಸಂಸ್ಕೃತ ಮತ್ತು ಚಿತ್ರಕಲಾ ಕಾಲೇಜುಗಳೂ ಒಳಗೊಂಡಂತೆ ರಾಜ್ಯದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಕಾಯಂ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರ ಹಂಚಿಕೆಯ ನಂತರ ಉಳಿಯುವ ಕಾರ್ಯಭಾರದ ಆಧಾರದಲ್ಲಿ ವಿವಿಧ ವಿಷಯಗಳ ಅತಿಥಿ ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಹೊಸ ನಿಯಮದ ಅನ್ವಯ ಈ ಬಾರಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಇದೇ ಜುಲೈ ಅಂತ್ಯದ ಒಳಗೆ ಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸಲು ಉನ್ನತ ಶಿಕ್ಷಣ ಇಲಾಖೆ ಸೂಚಿಸಿದೆ.
ಜಾತಿ ಆಧಾರಿತ ಮೀಸಲಾತಿ ನಿಯಮವು ತಾಂತ್ರಿಕ ಶಿಕ್ಷಣ ಇಲಾಖೆಯ ಸರ್ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಹಾಗೂ ಪಾಲಿಟೆಕ್ನಿಕ್ ಕಾಲೇಜುಗಳಿಗೂ ಅನ್ವಯವಾಗಲಿದೆ.