ಚಿತ್ರದುರ್ಗ: ಅಧಿಕಾರಿಗಳು ಸಾರ್ವಜನಿಕರ ಕೆಲಸಗಳನ್ನು ವಿಳಂಬ ಮಾಡದೆ ಜವಾಬ್ದಾರಿಯಿಂದ ನಿರ್ವಹಿಸಬೇಕು. ಕರ್ತವ್ಯ ಲೋಪ ಎಸಗಿದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಪ್ರಕೃತಿ ವಿಕೋಪ ಪರಿಹಾರಗಳ ಜಿಲ್ಲಾ ಉಸ್ತುವಾರಿ ಸಚಿವ ಟಿ. ರಘುಮೂರ್ತಿ ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ‘ಜಿಲ್ಲಾ ವಿಪತ್ತು ನಿರ್ವಹಣೆ ಸಭೆ'ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಧಿಕಾರಿಗಳು ಸಾರ್ವಜನಿಕರ ಪರವಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿದಾಗ ಮಾತ್ರ ಸರ್ಕಾರ ಹಾಗೂ ಜನಪ್ರತಿನಿಧಿಗಳಿಗೆ ಒಳ್ಳೆಯ ಹೆಸರು ಬರುತ್ತದೆ. ಆದರೆ, ವ್ಯವಸ್ಥೆಯಲ್ಲಿ ಲೋಪದೋಷಗಳು ಅಥವಾ ತೊಂದರೆಗಳಾದಾಗ ಸಾರ್ವಜನಿಕರು ಜನಪ್ರತಿನಿಧಿಗಳನ್ನು ಹಾಗೂ ಸರ್ಕಾರವನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡುತ್ತಾರೆ. ಆದ್ದರಿಂದ ಅಧಿಕಾರಿಗಳು ತಮ್ಮ ಅಧಿಕಾರ ಮತ್ತು ಜವಾಬ್ದಾರಿಯನ್ನು ಸರಿಯಾಗಿ ಬಳಸಿಕೊಳ್ಳಬೇಕು.
ಕೆಲವು ಅಧಿಕಾರಿಗಳು ಕ್ಷೇತ್ರ ಮಟ್ಟಕ್ಕೆ ಹೋಗಿ ಪರಿಶೀಲನೆ ನಡೆಸದೆ, ಸಭೆಗಳಲ್ಲಿ ಕೇವಲ ಕಾಗದದ ಮೇಲಿನ ಮಾಹಿತಿಯನ್ನμÉ್ಟೀ ನೀಡುತ್ತಿದ್ದಾರೆ. ಯಾರೂ ಕ್ಷೇತ್ರಕ್ಕೆ ಹೋಗಿ ಕೆಲಸ ಮಾಡುತ್ತಾರೋ ಅವರು ಮಾತ್ರ ಸಭೆಯಲ್ಲಿ ಆತ್ಮವಿಶ್ವಾಸದಿಂದ ಮಾಹಿತಿ ನೀಡಲು ಸಾಧ್ಯ. ಇನ್ನು ಮುಂದೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ನಿಖರ ಮಾಹಿತಿ ನೀಡಬೇಕು.
ವಿಶೇಷವಾಗಿ ಪ್ರಕೃತಿ ವಿಕೋಪ ಹಾಗೂ ಬರಗಾಲದಂತಹ ಸವಾಲಿನ ಪರಿಸ್ಥಿತಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ತಮ್ಮ ತಾಲೂಕು ಕೇಂದ್ರಗಳಲ್ಲೇ ಇರಬೇಕು. ತುರ್ತು ಸಂದರ್ಭಗಳಲ್ಲಿ ಮೇಲಧಿಕಾರಿಗಳ ಅನುಮತಿ ಪಡೆಯದೆ ಅಥವಾ ರಜೆ ತೆಗದುಕೊಳ್ಳದೆ ಕೇಂದ್ರಸ್ಥಾನ ಬಿಟ್ಟು ತೆರಳಬಾರದು.
ಸಾರ್ವಜನಿಕರನ್ನು ಸಣ್ಣಪುಟ್ಟ ಕೆಲಸಗಳಿಗಾಗಿ ಕಚೇರಿಗಳಿಗೆ ಪದೇ ಪದೇ ಅಲೆದಾಡಿಸುವುದು ಮತ್ತು ಉದಾಸೀನತೆ ತೋರುವುದನ್ನು ಸಹಿಸಲು ಸಾಧ್ಯವಿಲ್ಲ. ಕರ್ತವ್ಯ ಲೋಪ, ನಿರ್ಲಕ್ಷ್ಯ ಅಥವಾ ಆರ್ಥಿಕ ಅವ್ಯವಹಾರಗಳು ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಲಾಗುವುದು.
ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಬಗೆಹರಿಸುವ ನಿಟ್ಟಿನಲ್ಲಿ, ಜನಸಂಪರ್ಕ ಸಭೆ ನಡೆಸಲಾಗುವುದು. ಸಾರ್ವಜನಿಕರ ಸಮಸ್ಯೆಗಳನ್ನು ಸ್ಥಳದಲ್ಲೇ ಆಲಿಸಿ, ತ್ವರಿತ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸಾರ್ವಜನಿಕರ ರಸ್ತೆ, ನೀರಾವರಿ, ಹಕ್ಕುಪತ್ರ ಹಾಗೂ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನೇರವಾಗಿ ಪರಿಶೀಲಿಸಲಾಗುತ್ತದೆ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಯಾವುದೇ ನೆಪ ಹೇಳದೆ ಅರ್ಜಿ ವಿಲೇವಾರಿಗೆ ಜವಾಬ್ದಾರರಾಗಿರುತ್ತಾರೆ ಎಂದರು.