ಬೆಂಗಳೂರು: ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಕಾಂಗ್ರೆಸ್ ಹೈಕಮಾಂಡ್ ಸೂಚನೆ ನೀಡಿದೆ. ದೆಹಲಿಯಲ್ಲಿ ಇಂದು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಂದ ಮಾಹಿತಿ ಪಡೆದ ಕಾಂಗ್ರೆಸ್ ಹೈಕಮಾಂಡ್ ಮುಂದಿನ ರಾಜಕೀಯ ಬೆಳವಣಿಗೆ ವಿಶ್ಲೇಷಿಸಿ ಸಚಿವ ನಾಗೇಂದ್ರ ರಾಜೀನಾಮೆಗೆ ಸೂಚನೆ ನೀಡಿದೆ ಎನ್ನಲಾಗಿದೆ.
ಸರ್ಕಾರ ಮತ್ತು ಪಕ್ಷದ ಹಿತದೃಷ್ಟಿಯಿಂದ ನಾಗೇಂದ್ರ ಅವರ ರಾಜೀನಾಮೆಗೆ ಸೂಚನೆ ನೀಡಲಾಗಿದೆ. ಇಂದು ದೆಹಲಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಹೈಕಮಾಂಡ್ ನಾಗೇಂದ್ರ ಅವರ ಕುರಿತಾದ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದು, ಈಗಾಗಲೇ ನಾಗೇಂದ್ರ ಅವರಿಗೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ನಿಂದ ಸಂದೇಶ ನೀಡಲಾಗಿದೆ. ಇನ್ನೆರಡು ದಿನಗಳಲ್ಲಿ ನಾಗೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ.
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಂತರ ರೂಪಾಯಿ ದುರುಪಯೋಗದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಪ್ರತಿಪಕ್ಷಗಳು ಪಟ್ಟು ಹಿಡಿದಿವೆ.
ಇಂದು ದೆಹಲಿಯಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಇತರ ಹೈಕಮಾಂಡ್ ನಾಯಕರ ಭೇಟಿಯಾದ ಸಿಎಂ ಡಿ.ಕೆ. ಶಿವಕುಮಾರ್ ಅವರು, ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ. ನಾಗೇಂದ್ರ ಅವರು ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದ ಪಕ್ಷ ನಿಷ್ಠ ನಾಯಕ, ಶಿಸ್ತಿನ ಸಿಪಾಯಿ ಮತ್ತು ಪಕ್ಷಕ್ಕೆ ಆಸ್ತಿಯಾಗಿದ್ದಾರೆ. ಪಕ್ಷದ ಹಿತಕ್ಕಾಗಿ ಅವರು ಯಾವುದೇ ತ್ಯಾಗಕ್ಕೂ ಸಿದ್ಧರಿದ್ದಾರೆ. ಈ ಬಗ್ಗೆ ಹೈಕಮಾಂಡ್ ಮುಂದೆ ವಾಸ್ತವಾಂಶಗಳನ್ನು ಮಂಡಿಸಿದ್ದು, ಅಂತಿಮ ನಿರ್ಧಾರವನ್ನು ವರಿಷ್ಠರೇ ತೆಗೆದುಕೊಳ್ಳಲಿದ್ದಾರೆ ತಿಳಿಸಿದ್ದಾರೆ.